*ಜಿಲ್ಲಾ ಸ್ವೀಪ್ ಸಮಿತಿ
*ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಜಾಗೃತಿ ಕಾರ್ಯಕ್ರಮ*
*ಧಾರವಾಡ (ಕರ್ನಾಟಕ ವಾರ್ತೆ) ಜ.03:* ಇಂದು ದಿನಾಂಕ 3-01-2024 ರಂದು ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಧಾರವಾಡ ರವರಿಂದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ- 2024ರ ಕುರಿತು ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಬೈಕ್ ರಾಲಿ ಮುಖಾಂತರ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಬೈಕ್ ರ್ಯಾಲಿಗೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಟಿ.ಕೆ. ಸ್ವರೂಪ ಅವರು ಹಸಿರು ಬಾವುಟ ತೋರಿಸುವ ಮೂಲಕ ಬೈಕ್ ರ್ಯಾಲಿಗೆ ಚಾಲನೆ ನೀಡಿದರು. ನಂತರ ಅವರು ಮಾತನಾಡಿ, ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2024ರ ಕುರಿತು ಜನಜಾಗೃತಿಗೆ ಆಗಮಿಸಿದ್ದ ಎಲ್ಲ ಉಪನ್ಯಾಸಕರಿಗೆ ತಮ್ಮ ಕಾಲೇಜುಗಳಲ್ಲಿ ಇರುವ ಎಲ್ಲ ವಿದ್ಯಾರ್ಥಿಗಳು ಕ್ಯಾಂಪಸ್ ರಾಯಭಾರಿಯಾಗಿ ಕಾರ್ಯನಿರ್ವಹಿಸುವಂತೆ ಸಿದ್ಧಗೊಳಿಸಬೇಕು ಎಂದು ಹೇಳಿದರು. ಜಿಲ್ಲೆಯ ಅರ್ಹ ನಾಗರಿಕರು ಕಡ್ಡಾಯವಾಗಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬೇಕು. ಮತದಾರರ ಪಟ್ಟಿಗೆ ಸಂಭಂದಿಸಿದಂತೆ ಸಂದೇಹಗಳಿದ್ದರೆ, ಭಾರತ ಚುನಾವಣಾ ಆಯೋಗದ ಸಹಾಯವಾಣಿ, ಟೋಲ್ ಫ್ರೀ ನಂಬರ್ 1950ಗೆ ಕರೆ ಮಾಡಿ ತಮಗೆ ಬೇಕಾದ ಮಾಹಿತಿಯನ್ನು ಪಡೆದುಕೊಳ್ಳಬಹುದು. ಯಾವುದೇ ಅರ್ಹ ಮತದಾರರು ಮತದಾನದಿಂದ ವಂಚಿತರಾಗದಂತೆ ಮುನ್ನೆಚ್ಚರಿಕೆ ವಹಿಸಲು ಅವರು ಸಲಹೆ ನೀಡಿದರು. ಆರಂಭದಲ್ಲಿ ಎಲ್ಲರಿಗೂ ಪ್ರತಿಜ್ಞಾವಿಧಿ ಬೋಧಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕಿ ರೇಖಾ ಡೊಳ್ಳಿನವರ, ಪ್ರಾಸ್ತವಿಕವಾಗಿ ಮಾತನಾಡಿ, ಯುವ ಮತದಾರರ ಜವಾಬ್ದಾರಿಗಳ ಬಗ್ಗೆ ಮನವರಿಕೆಯನ್ನು ಮಾಡಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೆ.ಪಿ.ಸುರೇಶ, ಸಂಪನ್ಮೂಲ ವ್ಯಕ್ತಿ ಕೆ.ಎಂ. ಶೇಖ ಹಾಗೂ ಧಾರವಾಡ ಶಹರದ ವಿವಿಧ ಪಿಯು ಕಾಲೇಜುಗಳ ಉಪನ್ಯಾಸಕರು ಭಾಗವಹಿಸಿದ್ದರು. ಬೈಕ್ರ್ಯಾಲಿಯು ಆರ್. ಎನ್. ಶೆಟ್ಟಿ ಕ್ರೀಡಾಂಗಣದಿಂದ ಪ್ರಾರಂಭಗೊಂಡು ಜುಬ್ಲಿ ಸರ್ಕಲ್ ಹಾಗೂ ವಿವೇಕಾನಂದ ಸರ್ಕಲ್ ಮಾರ್ಗವಾಗಿ ಮರಳಿ ಆರ್.ಎನ್. ಶೆಟ್ಟಿ ಕ್ರೀಡಾಂಗಣಕ್ಕೆ ಆಗಮಿಸಿ, ಮುಕ್ತಾಯಗೊಂಡಿತು.
